ಈ ಲೇಖನ ಅಥವಾ ವಿಭಾಗವನ್ನು ಮಾರ್ಗದರ್ಶಿ ವಿನ್ಯಾಸ ಮತ್ತು ಕೈಪಿಡಿಯ ಶೈಲಿ ಪುಟಗಳಲ್ಲಿ ಸೂಚಿಸಿರುವಂತೆ ವಿಕೀಕರಣ (format) ಮಾಡಬೇಕಿದೆ.
ಈ ಲೇಖನದಲ್ಲಿ ಸರಿಯಾದ ಉಲ್ಲೇಖದ ಅಗತ್ಯವಿದೆ ಸರಿಯಾದ ಉಲ್ಲೇಖಗಳನ್ನು ಸೇರಿಸಿ ಲೇಖನವನ್ನು ಉತ್ತಮಗೊಳಿಸಿ. ಲೇಖನದ ಬಗ್ಗೆ ಚರ್ಚೆ ನಡೆಸಲು ಚರ್ಚೆ ಪುಟವನ್ನು ನೋಡಿ. |
ಹೆಳವನಕಟ್ಟೆ ಗಿರಿಯಮ್ಮ ಕ್ರಿ.ಶ.೧೭೫೦ರ ಸುಮಾರಿಗೆ ಜೀವಿಸಿದ್ದಳು. ಇವಳ ತವರೂರು ಹಾವೇರಿ ಜಿಲ್ಲೆಯ ರಾಣಿಬೆನ್ನೂರು. ತಾಯಿ ತುಂಗಮ್ಮ ; ತಂದೆ ಬಿಷ್ಟಪ್ಪ ಜೋಯಿಸರು. ಇವರಿಗೆ ದೀರ್ಘ ಕಾಲದ ನಂತರ, ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಬಳಿಕ, ಹೆಣ್ಣು ಮಗುವಿನ ಜನನವಾಯಿತು. ತಿಮ್ಮಪ್ಪನ ಅನುಗ್ರಹದ ಸಂಕೇತವಾಗಿ ಮಗುವಿಗೆ “ಗಿರಿಯಮ್ಮ” ಎಂದು ಹೆಸರನ್ನಿಟ್ಟರು.
ಚಿಕ್ಕಂದಿನಿಂದಲೂ ಗಿರಿಯಮ್ಮ ಸ್ತೋತ್ರಪಾಠಗಳಲ್ಲಿ, ಪೂಜಾಕಾರ್ಯಕ್ಕೆ ನೆರವಾಗುವದರಲ್ಲಿ ಜಾಣೆಯಾಗಿದ್ದಳು. ಇವಳಿಗೆ ೪ ವರ್ಷ ವಯಸ್ಸಾದಾಗ ತಾಯಿ ತೀರಿಕೊಂಡರು. ತಾಯಿಯ ಹಿಂದೆಯೆ ತಂದೆ ಸಹ ಗತಿಸಿದರು. ಗಿರಿಯಮ್ಮ ಚಿಕ್ಕಮ್ಮ, ಚಿಕ್ಕಪ್ಪರ ವಾತ್ಸಲ್ಯದ ಆಶ್ರಯದಲ್ಲಿ ಬೆಳೆದಳು. ಬೆಳೆಯುತ್ತಿದ್ದಂತೆ ಗಿರಿಯಮ್ಮ ದೇವರ ಹಾಡುಗಳನ್ನು ಹಾಡುತ್ತ ನರ್ತಿಸುವದರಲ್ಲಿ ಪರವಶಳಾಗತೊಡಗಿದಳು. ತನ್ನ ಬಳಗದವರೊಂದಿಗೆ ಇವಳೊಮ್ಮೆ ಮಲೇಬೆನ್ನೂರಿಗೆ ಹೋದಾಗ ಅಲ್ಲಿಯ ರಂಗನಾಥಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದಳು. ಉಡುಪಿ ಯಾತ್ರೆಗೆಂದು ಆ ಮಾರ್ಗವಾಗಿ ಹೋಗುತ್ತಿದ್ದ ಗೋಪಾಲದಾಸರ ಅಕಸ್ಮಾತ್ ದರ್ಶನ ಹಾಗು ಅನುಗ್ರಹ ಈ ಬಾಲೆಗೆ ಆಯಿತು.
ಆ ಕಾಲದ ಸಂಪ್ರದಾಯದಂತೆ ಗಿರಿಯಮ್ಮನ ಮದುವೆ ಬಾಲ್ಯದಲ್ಲೆ ,ಮಲೇಬೆನ್ನೂರಿನ ಶ್ಯಾನುಭೋಗರಾದ ಕೃಷ್ಣಪ್ಪನವರ ಮಗ ತಿಪ್ಪರಸನೊಡನೆ ಜರುಗಿತು. ಗಿರಿಯಮ್ಮನ ಮನಸ್ಸು ರಂಗನಾಥಸ್ವಾಮಿಯಲ್ಲಿಯೆ ನಿಂತುಹೋಗಿತ್ತು. ಅವಳು ಲೌಕಿಕ ಸಂಸಾರ ವಿಮುಖಳಾಗಿದ್ದಳು. ಅವಳ ಪತಿ ತಿಪ್ಪರಸ ಅವಳ ಮನಸ್ಸನ್ನು ಅರಿತಿದ್ದರಿಂದ ಅವಳಿಗೆ ವಿರೋಧವಾಗಿ ನಡೆಯಲಿಲ್ಲ. ಆದರೆ ಅತ್ತೆಯ ಕಾಟ ದಿನೇ ದಿನೇ ಹೆಚ್ಚಾಗತೊಡಗಿತು. ಕೊನೆಗೊಮ್ಮೆ ಗಿರಿಯಮ್ಮನೆ ಸ್ವತಃ ತಿಪ್ಪರಸನಿಗೆ ಕನ್ಯೆ ಹುಡುಕಿ ಎರಡನೆಯ ಮದುವೆ ಮಾಡಿಸಿದಳು.
ಗಿರಿಯಮ್ಮನ ಸಾಧನೆ ಮುಂದುವರಿಯುತ್ತಿದ್ದಂತೆ ಹೆಳವನಕಟ್ಟೆಗೆ ರಂಗನಾಥಸ್ವಾಮಿಯ ದರ್ಶನಕ್ಕೆ ಬರುತ್ತಿದ್ದವರು ಈಕೆಯ ಭಕ್ತರಾಗತೊಡಗಿದರು. ಗಿರಿಯಮ್ಮನ ಕರುಣೆಯಿಂದ ಅನೇಕ ಜನರಿಗೆ ರೋಗ ನಿವಾರಣೆ ಮೊದಲಾದ ಪರಿಹಾರ ದೊರೆಯತೊಡಗಿದವು.
ಮೊದಲೊಮ್ಮೆ ಉಡುಪಿಗೆ ಹೋಗುತ್ತಿದ್ದಾಗ ದರ್ಶನವಿತ್ತ ಗೋಪಾಲದಾಸರು ಮತೊಮ್ಮೆ ಅದೇ ಮಾರ್ಗವಾಗಿ ಉಡುಪಿಗೆ ಹೋಗುತ್ತಿರುವಾಗ ಗಿರಿಯಮ್ಮನಿಗೆ ಬಾಲಗೋಪಾಲನ ವಿಗ್ರಹ ನೀಡಿ ಆಶೀರ್ವದಿಸಿದರು. “ಹೆಳವನಕಟ್ಟೆ ರಂಗ”ನ ಅಂಕಿತದಲ್ಲಿ ದೇವರ ನಾಮಗಳನ್ನು ರಚಿಸಲು ಸೂಚಿಸಿದರು.
ಇನ್ನೊಮ್ಮೆ ದಕ್ಷಿಣಾದಿ ಶ್ರೀಕವೀಂದ್ರಮಠದ ಮಂತ್ರಾಲಯ ಪೀಠಾಧಿಪತಿಗಳಾದ ಶ್ರೀಸುಮತೀಂದ್ರತೀರ್ಥರು (ಶ್ರೀರಾಘವೇಂದ್ರ ಸ್ವಾಮಿಗಳ ನಂತರ ಅವರ ಪೀಠದಲ್ಲಿ ಬಂದ ಮೂರನೆಯ ಪೀಠಾಧಿಪತಿಗಳು) ಸಂಚಾರದಲ್ಲಿ ಧಾರವಾಡ ಜಿಲ್ಲೆಯ ಮಲೇಬೆನ್ನೂರಿಗೆ ಬಂದಾಗ ಗಿರಿಯಮ್ಮನ ಕೆಲವು ವಿರೋಧಿಗಳು ಅವರನ್ನು ಬಂಜೆ ಎನ್ನುವ ಉದ್ದೇಶಮಾಡಿಕೊಂಡು ಸ್ವಾಮಿಗಳು ತೀರ್ಥಕೊಡಲು ವಿರೋಧಿಸಿದ್ದರು. ಅಪರೋಕ್ಷ ಜ್ಞಾನಿಗಳಾದ ಸ್ವಾಮಿಗಳು ಗಿರಿಯಮ್ಮನವರನ್ನು ಮುಂದೆ ಬರುವುದಾಗಿ ಹೇಳಿ ಅವರಿಗೆ ತೀರ್ಥವನ್ನು ನೀಡಿದರು. ತೀರ್ಥ ಕೊಟ್ಟನಂತರ ಅವರ ಕೈಗಳನ್ನು ನೋಡಿ, "ಯಾರು ಈಕೆಯನ್ನು ಬಂಜೆಯೆಂದು ಕರೆದದ್ದು!?, ಇವರದ್ದು ಅಖಿಲಾಂಡಕೋಟಿ ಬ್ರಹ್ಮಾಂಡನಾಯಕನಾದ ಬಾಲಗೋಪಾಲಕೃಷ್ಣನನ್ನು ಆಡಿಸಿದ ಯಶೋದೆಯ ಕೈ"... ಎಂಬುದಾಗಿ ಘೋಷಣೆ ಮಾಡಿದರು. ಅಂದಿನಿಂದ ಹೆಳವನ ಕಟ್ಟೆ ಗಿರಿಯಮ್ಮನವರನ್ನು ಯಶೋದೆಯ ಅವತಾರ ಎಂಬುದಾಗಿ ಕರೆಯಲಾಗುತ್ತದೆ.
ರಂಗನಾಥಸ್ವಾಮಿಯ ಬೆರಳ ಉಂಗುರ ಕಾಣೆಯಾದಾಗ ಗುಬ್ಬಿಯ ಮೂಲಕ ಅದನ್ನು ಮರಳಿ ಪಡೆದದ್ದು, ಮೃತ ಶಿಶುವನ್ನು ಬದುಕಿಸಿದ್ದು, ಕುರುಡು ಬಾಲಕನಿಗೆ ದೃಷ್ಟಿದಾನ ಮಾಡಿದ್ದು ಮೊದಲಾದ ಪವಾಡಗಳನ್ನು ಗಿರಿಯಮ್ಮ ಮಾಡಿದ್ದಾಗಿ ಹೇಳಲಾಗುತ್ತಿದೆ. ಆ ಪ್ರದೇಶದಲ್ಲಿ ಒಮ್ಮೆ ಭೀಕರ ಬರಗಾಲ ಬಂದಿದ್ದು ಅವಳ ಒಂದು ಹಾಡಿನಲ್ಲಿ ಗೊತ್ತಾಗುತ್ತದೆ. ಆ ಹಾಡಿನ ನಂತರದಲ್ಲಿ ಮಳೆಯಾಯಿತೆಂದು ಹೇಳುತ್ತಾರೆ.
ಹೊನ್ನಾಳಿಗೆ ಸಮೀಪವಾಗಿ ತುಂಗಭದ್ರಾ ನದಿಯ ದಂಡೆಯ ಮೇಲೆ ಕಮ್ಮಾರಗಟ್ಟೆ ಎನ್ನುವ ಗ್ರಾಮವಿದೆ. ಒಂದು ಶ್ರಾವಣ ಶುದ್ಧ ಪಂಚಮಿಯ ದಿನ ಗಿರಿಯಮ್ಮ ತುಂಗಾಭದ್ರಾ ಪ್ರವಾಹದಲ್ಲಿಳಿದು ಜಲಸಮಾಧಿ ಹೊಂದಿದಳು.ಆ ಸ್ಥಳದಲ್ಲಿ ನದಿಗೆ ಸೋಪಾನವನ್ನೂ, ಮಾರುತಿ ದೇವಸ್ಥಾನವನ್ನೂ ಗಿರಿಯಮ್ಮನೆ ಕಟ್ಟಿಸಿದ್ದಳೆಂದು ಹೇಳಲಾಗುತ್ತಿದೆ.
ಕ್ರಿ.ಶ.೧೨೭೫ರ ಸುಮಾರಿನಲ್ಲಿ ನರಹರಿತೀರ್ಥರಿಂದ ಪ್ರಾರಂಭವಾದ ದಾಸಸಾಹಿತ್ಯದ ಪ್ರಾಚೀನ ಪರಂಪರೆ ಹೆಳವನಕಟ್ಟೆ ಗಿರಿಯಮ್ಮನವರೆಗೆ ನಡೆದುಕೊಂಡು ಬಂದಿತೆಂದು ಹೇಳಬಹುದು. ಗಿರಿಯಮ್ಮ ಅನೇಕ ದೇವರ ನಾಮಗಳನ್ನಲ್ಲದೆ, ಏಳು ವಿಶೇಷ ಕೃತಿಗಳನ್ನೂ ರಚಿಸಿದ್ದಾಳೆ.
ಟಿಪ್ಪಣಿ: ಹೆಳವನಕಟ್ಟೆ ಶ್ರೀ ಲಕ್ಷ್ಮೀರಂಗನಾಥ ದೇವಾಲಯವು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಕೊಮಾರನಹಳ್ಳಿಯಲ್ಲಿ ಇದೆ.
This article uses material from the Wikipedia ಕನ್ನಡ article ಹೆಳವನಕಟ್ಟೆ ಗಿರಿಯಮ್ಮ, which is released under the Creative Commons Attribution-ShareAlike 3.0 license ("CC BY-SA 3.0"); additional terms may apply (view authors). ವಿಶೇಷವಾಗಿ ಟಿಪ್ಪಣಿ ಮಾಡದಿದ್ದ ಹೊರತು ಪಠ್ಯ "CC BY-SA 4.0" ರಡಿ ಲಭ್ಯವಿದೆ. Images, videos and audio are available under their respective licenses.
®Wikipedia is a registered trademark of the Wiki Foundation, Inc. Wiki ಕನ್ನಡ (DUHOCTRUNGQUOC.VN) is an independent company and has no affiliation with Wiki Foundation.